ಶಿವಮೊಗ್ಗ||ಭದ್ರಾವತಿ ಡಿ 26
ಜಗತ್ತಿಗೆ ತ್ಯಾಗ, ಪ್ರೀತಿಯ ಸಂದೇಶ ಸಾರಿದ ಯೇಸುಕ್ರಿಸ್ತನ ಜನ್ಮದಿನವನ್ನು ಬುಧವಾರ ತಾಲೂಕಿನ ಎಲ್ಲಾ ಚರ್ಚ್ ಗಳಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ತಾಲೂಕಿನ ಹಳೇ ನಗರ ಗಾಂಧಿನಗರದ ವೇಳಾಂಗಣಿ ಆರೋಗ್ಯ ಮಾತೆ ದೇವಾಲಯ, ನ್ಯೂಟೌನ್ ಅಮಲೋಧ್ಭವಿ ಮಾತೆ ದೇವಾಲಯ, ಕಾರೆಹಳ್ಳಿಯ ಸಂತ ಅಂತೋಣಿಯವರ ದೇವಾಲಯ, ಕಾಗದ ನಗರದ ಸಂತ ಜೋಸೆಫರ ದೇವಾಲಯಗಳು ಸೇರಿದಂತೆ ತಾಲೂಕಿನ ಇತರೆ ದೇವಾಲಯಗಳಲ್ಲಿ ನಿರ್ಮಾಣ ಮಾಡಲಾದ ಕ್ರಿಸ್ಮಸ್ ಟ್ರೀ, ವಿವಿಧ ರೀತಿಯ ನಕ್ಷತ್ರಗಳು, ಯೇಸುವಿನ ಜನನ ಸಂದರ್ಭದ ಕ್ಷಣಗಳನ್ನು ನೆನಪಿಸುವ ಗೋದಲಿ ಗಮನ ಸೆಳೆಯಿತು. ದೀಪಾಲಂಕಾರದೊಂದಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಮಂಗಳವಾರ ಮಧ್ಯರಾತ್ರಿ ಹಾಗೂ ಬುಧವಾರ ಮುಂಜಾನೆ ವಿಶೇಷ ಪ್ರಾರ್ಥನೆಗಳಲ್ಲಿ ಕ್ರೈಸ್ತ ಧರ್ಮೀಯರು ಪಾಲ್ಗೊಂಡಿದ್ದರು. ಚರ್ಚ್ ಗಳಲ್ಲಿ ಕೇಕ್, ಚಾಕಲೇಟ್, ಸಿಹಿ ತಿಂಡಿಗಳನ್ನು ಹಂಚಲಾಯಿತು. ಮನೆಯಲ್ಲಿ ವಿಶೇಷ ಖಾದ್ಯಗಳನ್ನು ತಯಾರಿಸಿ, ಹಬ್ಬದ ಊಟ ಮಾಡಲಾಯಿತು. ಕ್ರಿಸ್ತನ ಜನನದ ಶುಭ ಗಳಿಗೆಯ ಸ್ಮರಣೆಗೆ ಸಂಕೇತವಾಗಿ ಮೇಣದ ಬತ್ತಿಗಳನ್ನು ಬೆಳಗಿಸಲಾಯಿತು. ಪುಟ್ಟ ಮಕ್ಕಳು ಸಂತ ಕ್ಲಾಸ್ ವೇಶ ಧರಿಸಿ ಗಮನಸೆಳೆದರು.
ಶಾಂತಿ, ದೀನತೆಗಾಗಿ ಪ್ರಾರ್ಥನೆ ಸಲ್ಲಿದ ಭಕ್ತರು :
ಕ್ರಿಸ್ಮಸ್ ಬಾಹ್ಯ ಆಡಂಬರವಾಗಿರದೆ ಪರರ ಕಷ್ಟಕ್ಕೆ ಸಹಾಯ, ಸೇವೆ ಸಲ್ಲಿಸುವ ಹಬ್ಬವಾಗಿದೆ ಎಂದು ಕಾರೆಹಳ್ಳಿಯ ಸಂತ ಅಂತೋಣಿ ದೇವಾಲಯದ ಧರ್ಮ ಕೇಂದ್ರದ ಗುರುಗಳಾದ ಫಾದರ್ ಸಂತೋಷ್ ಅಲ್ಮೇಡ ತಿಳಿಸಿದರು.
ಪ್ರತಿಯೊಬ್ಬರ ಮನಸ್ಸು, ಹೃದಯದಲ್ಲಿ ಯೇಸು ಜನಿಸಬೇಕು ಇರುವವರು ಇಲ್ಲದವರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡಬೇಕು ಎಂದು ಮನವಿ ಮಾಡಿದರು.
ದೇಶಗಳ ನಡುವೆ ನಡೆಯುತ್ತಿರುವ ಯುದ್ಧಗಳು, ದೇಶದ ಭ್ರಷ್ಟಾಚಾರದ ರಾಜಕಾರಣ ದೂರವಾಗಿ ಎಲ್ಲರ ನಡುವೆ ಐಕ್ಯತೆ, ಸಮಾನತೆ ಮೂಡಲಿ ವಿಶ್ವದಲ್ಲಿ ಶಾಂತಿ ನೆಲೆಸಲಿ. ಯುವಜನರು ಆಧುನಿಕ ಜೀವನದ ಭರಾಟೆಯಲ್ಲಿ ದಾರಿ ತಪ್ಪದೆ ಉತ್ತಮ ಜೀವನ ನಡೆಸಲು ಬೇಕಾದ ಸ್ಥೈರ್ಯ, ಮನೋಬಲವನ್ನು ದೇವರು ನೀಡಲಿ ಎಂದು ಪ್ರಾರ್ಥಿಸಲಾಯಿತು