ರಸ್ತೆ ಅಪಘಾತ-ಚಿರತೆ ಸಾವು
ಸುದ್ದಿಲೈವ್/ಶಿವಮೊಗ್ಗ
ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಆಯನೂರು ಸಮೀಪದ ಕಲ್ಲುಕುರ್ಚಿ ಬಳಿ ಸಂಭವಿಸಿದೆ.
ಆಯನೂರಿನಿಂದ ಹಣಗೆರೆಕಟ್ಟೆ-ತೀರ್ಥಹಳ್ಳಿ ಮಾರ್ಗದಲ್ಲಿ ಸೋಮವಾರ ರಾತ್ರಿ ಘಟನೆ ನಡೆದಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ರಸ್ತೆ ದಾಟಲು ಪ್ರಯತ್ನಿಸಿರುವ ಚಿರತೆಗೆ ಅಪರಿಚಿತ ವಾಹನ ಮುಖಕ್ಕೆ ಅಪ್ಪಳಿಸಿದೆ. ಇದರಿಂದ ಚಿರತೆ ಮುಖ ಸಂಪೂರ್ಣ ನಜ್ಜುಗುಜ್ಜಾಗಿ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದೆ. ಇದು ಒಂದೂವರೆ ವರ್ಷ ಪ್ರಾಯದ ಗಂಡು ಚಿರತೆಯಾಗಿತ್ತು.
ಸುದ್ದಿ ತಿಳಿದ ಕೂಡಲೇ ಹಣಗೆರೆಕಟ್ಟೆ ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶೆಟ್ಟಿಹಳ್ಳಿ ವನ್ಯಜೀವಿ ವಿಭಾಗದ ಡಿಎಫ್ಒ ಪ್ರಸನ್ನಕೃಷ್ಣ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದರು. ಬಳಿಕ ನ್ಯಾಯಾಲಯದ ಅನುಮತಿ ಪಡೆದು ಚಿರತೆಗೆ ಅಗ್ನಿಸ್ಪರ್ಶ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ-https://suddilive.in/archives/8565